Mysore
20
scattered clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳ ಘಟಕವತಿಯಿಂದ ನಾಳೆ ಬೃಹತ್ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಇಂದಿನ (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಅನಂತ್ ನಾಯ್ಕ, ವಿದ್ಯಾರ್ಥಿ ಜಾಗೃತಿ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ ಮಾತನಾಡಿ, ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಬೆಂಗಳೂರಿನ ಮೌರ್ಯ ವೃತ್ತದಿಂದ ರಾಜಭವನದವರೆಗೆ ಪಂಜಿನ‌ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ,ಆಗಸ್ಟ್ 27ರಂದು ರಾಜಭವನ ಮುತ್ತಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಪಿತ್ತೂರಿಯ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಜತೆಗೂಡಿ ಹೋರಾಟ ನಡೆಸಲಾಗುವುದು ಎಂದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ, ರಾಜ್ಯ ಬಿಜೆಪಿಯ ಕೈ ಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಭವನ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಕೆಲಸ ನಡೆದಿದೆ. ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟರಂತೆ ವರ್ತಿಸುತ್ತಾ ಪ್ರಜಾ ಪ್ರಭುತ್ವ ಕಗ್ಗೊಲೆ ಮಾಡುತ್ತಿದ್ದಾರೆ ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳ ಪರವಾಗಿ ಅನೇಕ ಯೋಜನೆಗಳನ್ನು ಜಾರಿ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕುವ ಪ್ರಯತ್ನದ ವಿರುದ್ದ ರಾಜ್ಯದ ಎಲ್ಲ ಕಾಲೇಜು, ವಿಶ್ವವಿದ್ಯಾಲಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಸ್ನಾತಕೋತ್ತರ ಮತ್ತು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪ್ರಧಾನ ಕಾರ್ಯದರ್ಶಿ ಮೆಡಲ್ ಮುನಿ ಚಂದ್ರು, ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀನಾಥ್ ಮತ್ತಿತರರು ಭಾಗವಹಿಸಿದ್ದರು

Tags:
error: Content is protected !!