Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು.

ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಆಕ್ಸಿಯಂ ಸ್ಪೇಸ್-4 ಮಿಷನ್ ಯಶಸ್ವಿಯ ರುವಾರಿಯಾಗಿರುವ ಗಗನಯಾತ್ರಿ ಶ್ರೀಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. ಆದರೆ, ನನ್ನ ಯಾತ್ರೆಗೆ ಸಾವಿರಾರೂ ಮಂದಿ ಕೆಲಸ ಮಾಡಿದ್ದಾರೆ. ಎಂಜಿನಿಯರ್, ವೈದ್ಯರು ಹೀಗೆ ಸಾಕಷ್ಟು ಮಂದಿ ಇದ್ದಾರೆ. ಅವರಂತೆ ನೀವು ಆಗಬಹುದು’ ಎಂದರು.

ಇದನ್ನು ಓದಿ: ಮಾನವ ಸಹಿತ ಗಗನಯಾನಕ್ಕೆ ಸಜ್ಜಾದ ಇಸ್ರೋ

ನನ್ನ ಗಗನಯಾನಕ್ಕೆ ಸಾಕಷ್ಟು ಜನರ ಸ್ಪೂರ್ತಿ ಇದೆ. ಹೀಗಾಗಿ ಒಬ್ಬಿಬ್ಬರ ಹೆಸರೇಳುವುದು ಕಷ್ಟ. ಗಗನಯಾನಿ ರಾಕೇಶ್ ಶರ್ಮಾ ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ನೀವು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಅದನ್ನು ಸಾಧಿಸುವ ಛಲ ಇರಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ತಾಳ್ಮೆ ಇರಬೇಕು. ಏಕೆಂದರೆ, ನಾನು 20 ದಿನಗಳ ಯಾತ್ರೆಗೆ 5 ವರ್ಷಗಳ ತರಬೇತಿ ಪಡೆದಿದ್ದೇನೆ’ ಎಂದರು.

ಗಗನಯಾನ ನೀವು ಅಂದುಕೊಂಡಷ್ಟು ಸುಲಭವಾಗಿಲ್ಲ. ಹೊಸ ವಾತಾವರಣಕ್ಕೆ ಹೊಂದುಕೊಳ್ಳುವುದು ತೀರಾ ಕಷ್ಟ. ಬಾಹ್ಯಾಕಾಶಕ್ಕೆ ಹೋದ ಮೇಲೆ ನಾನು ಗಾಳಿಯಲ್ಲಿ ತೇಲಾಡುವುದು ಅಭ್ಯಾಸ ಮಾಡಿಕೊಂಡೆ. ಅಲ್ಲಿ ಹಲವಾರು ಸಂಶೋಧನೆಗಳನ್ನು ಕೈಗೊಳ್ಳಲಾಯಿತು. ಭೂಮಿಗೆ ಬರುವಾಗ ತುಂಬಾ ಕಷ್ಟವಾಗಿತ್ತು. ಬಂದ ಮೇಲೆ ಒಂದು ವಾರದ ವರೆಗೆ ನನಗೆ ನೇರವಾಗಿ ನಿಂತುಕೊಳ್ಳುವುದಕ್ಕೆ ಸಹ ಆಗುತ್ತಿರಲಿಲ್ಲ ಎನ್ನುವ ಮೂಲಕ ತಮ್ಮ ಅನುಭವನ್ನು ವಿದ್ಯಾರ್ಥಿಗಳ ಎದುರು ಬಿಚ್ಚಿಟ್ಟರು.

ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್.ಬೋಸರಾಜು ಮಾತನಾಡಿ, ನಿಮ್ಮ ಕೆಲಸದ ಮೂಲಕ ಭಾರತೀಯ ವಿಜ್ಞಾನಕ್ಕೆ ನೀವು ಕೇವಲ ಕೊಡುಗೆ ನೀಡುವುದು ಮಾತ್ರವಲ್ಲ, ಜಾಗತಿಕ ಜ್ಞಾನವನ್ನು ನಿರೂಪಿಸಿದ್ದೀರಿ. ನೀವು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕಾಲಿಟ್ಟಾಗ, ನೀವು ಕೇವಲ ರಾಷ್ಟ್ರಧ್ವಜವನ್ನೇ ಅಲ್ಲ, ಎಲ್ಲಾ ಭಾರತೀಯರ ಕನಸುಗಳನ್ನು ಕೂಡ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದು, ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದರು.

Tags:
error: Content is protected !!