ರಾಜ್ಯ

ಮೋದಿಯವರೇ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ, ಪರಸ್ಪರ ದೂಷಣೆ – ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು ಎಂದು ಸಲಹೆ ನೀಡಿದ್ದಾರೆ.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ದ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ… ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಟಾಂಗ್‌ ನೀಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago