Mysore
29
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮಂಡ್ಯ,ಚಾ.ನಗರ ವಿವಿ ಸೇರಿದಂತೆ 9 ಹೊಸ ವಿವಿ ಮುಚ್ಚುವ ಸಾಧ್ಯತೆ..?

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.

ಬೀದರ್ ವಿಶ್ವವಿದ್ಯಾಲಯವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಮಂಡ್ಯ, ಚಾಮರಾಜನಗರ ಮತ್ತು ಕೊಡಗು ವಿಶ್ವವಿದ್ಯಾಲಯ ಸೇರಿ ರಾಜ್ಯದ ಎಲ್ಲಾ ಹೊಸ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕು. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ವಿಸ್ತೀರ್ಣದ ಜಾಗ ಅಗತ್ಯವಿದೆ. ಬಹುತೇಕ ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. 342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ ಮೂಲಸೌಕರ್ಯ, ಸಲಕರಣೆ, ವಾಹನ, ಪೀಠೋಪಕರಣ ಇತರೆ ವಸ್ತುಗಳ ಖರೀದಿಸುವ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಿತ್ತು.

ಯಾವ್ಯಾವ ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ?
ಕೊಡಗು, ಹಾಸನ, ಚಾಮರಾಜನಗರ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ.

Tags:
error: Content is protected !!