ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಕುರಿತು ತನಿಖೆ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಯಸಸ್ವಿಯಾದ ಎಸ್ಐಟಿ ತಂಡಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.
ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಈ ಮಹತ್ವದ ತೀರ್ಪು ನೀಡಿದೆ.
ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದರು.





