ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ.
ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ.44ಕ್ಕೆ ಇಳಿದಿದೆ. ಜಲಾಶಯಗಳ ನೀರು ಕಡಿಮೆಯಾಗುತ್ತಿರುವುದರಿಂದ ಬೇಸಿಗೆ ಬೆಳೆಗಳಿಗೆ ನೀರಿನ ಅಭಾವ ತಲೆದೋರತೊಡಗಿದೆ. ಅಲ್ಲದೆ ಕುಡಿಯುವ ನೀರಿಗೂ ತೊಂದರೆಯಾಗುವ ಸಾಧ್ಯತೆಗಳಿವೆ.
ಕಳೆದ ವರ್ಷ ಮುಂಗಾರು ಮಳೆ ಚೆನ್ನಾಗಿ ಬಿದ್ದ ಪರಿಣಾಮ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಆದರೆ ಬಯಲುಸೀಮೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಪರಿಣಾಮ ಅಂತರ್ಜಲ ಕುಸಿತ ತೀವ್ರಗೊಂಡಿದ್ದು, ಈಗಾಗಲೇ ಹಲವು ಕಡೆಗಳಲ್ಲಿ ಕೊಳವೆ ಬಾವಿಗಳು ಬತ್ತತೊಡಗಿದ್ದು, ಕೃಷಿ ಹಾಗೂ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆಯವರೆಗೆ, ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ ಶೇ.44 ರಷ್ಟು ಮಾತ್ರ ನೀರಿನ ಸಂಗ್ರಹವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಂದು ಟಿಎಂಸಿಗಿಂತಲೂ ಹೆಚ್ಚು ನೀರು ಈ ಬಾರಿ ಕಡಿಮೆಯಿದೆ. 21.64 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 22.19 ಟಿಎಂಸಿಯಷ್ಟು ನೀರಿನ ಸಂಗ್ರಹವಿತ್ತು. ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೀರಿನ ಬಳಕೆಯೂ ಗಣನೀಯವಾಗಿ ಹೆಚ್ಚಾಗುತ್ತಿದೆ. 124.80 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್ಎಸ್ನಲ್ಲಿ 98 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ.
ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆಯಾಗದಿದ್ದರೂ ಬೇಸಿಗೆ ಮಳೆ ಸಾಕಷ್ಟು ಪ್ರಮಾಣದಲ್ಲಿ ಬಾರದೆ ಬಿಸಿಲಿನ ತೀವ್ರತೆ ಇದೇ ರೀತಿ ಮುಂದುವರೆದರೆ ನೀರಿನ ಸಂಕಷ್ಟ ಎದುರಾಗುವುದರಲ್ಲಿ ಆಶ್ಚರ್ಯವಿಲ್ಲ.
ಕಬಿನಿ ಜಲಾಶಯದಲ್ಲಿ 7.16 ಟಿಎಂಸಿ ನೀರಿದ್ದು, ಕಳೆದ ವರ್ಷ 9.81 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟು 4 ಜಲಾಶಯಗಳಿಂದ 49.93 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಿದೆ.
ಬೇಸಿಗೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ಮಳೆಯಾಗದ ಪರಿಣಾಮ ಏರಿರುವ ತಾಪಮಾನ ತಗ್ಗಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಜಲಾಶಯದ ಒಳಹರಿವು ಹೆಚ್ಚಳವಾಗುವುದಿಲ್ಲ. ಮುಂಗಾರು ಪ್ರಾರಂಭವಾಗುವ ಜೂನ್ವರೆಗೂ ಜಲಾಶಯಗಳಿಗೆ ನೀರು ಹರಿದುಬರುವ ಸಾಧ್ಯತೆ ವಿರಳವಾಗಿದೆ.




