ರಾಜ್ಯ

ಶೈಕ್ಷಣಿಕ ಮತ್ತು ಶ್ರೀಸಾಮಾನ್ಯರ ಪ್ರವಾಸೋದ್ಯಮಕ್ಕೆ ಆದ್ಯತೆ: ಎಚ್.ಕೆ. ಪಾಟೀಲ ಪ್ರತಿಪಾದನೆ

ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದಿಲ್ಲಿ ಬಲವಾಗಿ ಪ್ರತಿಪಾದಿಸಿದರು.

ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ದಕ್ಷಿಣದ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಸಚಿವರುಗಳ ಸಮ್ಮೇಳನದಲ್ಲಿ ಅವರು ಕರ್ನಾಟಕದ ನಿಲುವನ್ನು ಪ್ರತಿಪಾದಿಸಿದರು.

ಕರ್ನಾಟಕ ಪ್ರವಾಸೋದ್ಯಮ ಅತ್ಯಂತ ಉಚ್ಚಾಯ ಸ್ಥಿತಿಯಲ್ಲಿದ್ದು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಈ ಪ್ರಯತ್ನಿಗಳಿಗೆ ಬೆಂಬಲಿಸಬೇಕಾದ ಕೇಂದ್ರ ಸರ್ಕಾರವು ಮೈಸೂರಿನ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಪ್ರಸಾದ್‌ ಯೋಜನೆಯಡಿ ಬಿಡುಗಡೆಯಾಗಬೇಕಾದ 45.17 ಕೋಟಿ ರೂಪಾಯಿಗಳ ಮೊದಲ ಕಂತು ಇನ್ನು ಬಿಡುಗಡೆಯಾಗಿಲ್ಲ. ಮೈಸೂರು ಮತ್ತು ಹಂಪಿ ಯೋಜನೆಗಳನ್ನು ಸ್ವದೇಶಿ ದರ್ಶನ 2.0 ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು 46.17 ಕೋಟಿ ರೂಪಾಯಿಗಳು ಇನ್ನು ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

ಹಣ ಬಿಡುಗಡೆಯಲ್ಲಿ ಇಂಥ ವಿಳಂಬಗಳು ಅತ್ಯಂತ ಮಹತ್ವದ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಅಡ್ಡಿಯುಂಟುಮಾಡುತ್ತಿದ್ದು ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವಲ್ಲಿ ರಾಜ್ಯ ಸರ್ಕಾರವನ್ನು ಪೇಚಿಗೆ ಸಿಲುಕಿಸುತ್ತಿವೆ ಎಂದು ಹೇಳಿದರು. ಆದ್ದರಿಂದ ಮುಂದಿನ ಅನಾನುಕೂಲಗಳನ್ನು ತಪ್ಪಿಸಲು ಹಾಗೂ ಕಾಲಮಿತಿಗೊಳಪಟ್ಟು ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರದ ಹಣ ಬಿಡುಗಡೆಯನ್ನು ತ್ವರಿತಗೊಳಿಸಬೇಕೆಂದು ಒತ್ತಾಯಿಸಿದರು.

ಗೋಲ್ಡನ್‌ ಚಾರಿಯೆಟ್‌ ರೈಲು ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಭಾರತ್‌ ಗೌರವ ರೈಲ್ವೆ ನೀತಿಯಂತೆ ಗೋಲ್ಡನ್‌ ಚಾರಿಯೆಟ್‌ ಪ್ರವಾಸದ ನೀತಿಯನ್ನು ಬದಲಾವಣೆ ಮಾಡಿ ಪ್ರವಾಸದ ಶುಲ್ಕವನ್ನು ಕಡಿತಗೊಳಿಸುವ ಮೂಲಕ ಅತ್ಯಂತ ಮಹತ್ವದ ವೈಭವದ ಈ ಪ್ರವಾಸ ಯೋಜನೆಗೆ ಸಾರ್ವಜನಿಕರು ಉಪಯೋಗಿಸಲು ಅನುಕೂಲವಾಗಬೇಕೆಂದು ಒತ್ತಾಯಿಸಿದರು.

ಬೇರೆ ಬೇರೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಪಾರಂಪರಿಕ ತಾಣಗಳು ಮತ್ತು ಇಕೋ ಟೂರಿಸಂ ತಾಣಗಳನ್ನು ಅಂದರೆ ಪರಿಸರ ಪ್ರವಾಸೋದ್ಯಮ ತಾಣಗಳನ್ನು ಗೋಲ್ಡನ್‌ ಚಾರಿಯೆಟ್‌ ಯೋಜನೆಗೆ ಜೋಡಿಸಬೇಕೆಂದು ಎಲ್ಲ ವರ್ಗದ ಜನರು ಈ ಯೋಜನೆಯನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ನೀತಿ ಬದಲಾವಣೆ ಮತ್ತು ಪ್ರವೃತ್ತಿ ಬದಲಾವಣೆ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಕರ್ನಾಟಕದ ಪ್ರಸ್ತುತ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಮಾರ್ಗದತ್ತು ಯೋಜನೆ, ನಮ್ಮ ಸ್ಮಾರಕ ಯೋಜನೆಯನ್ನು ವಿವರಿಸಿದ ಸಚಿವರು ದತ್ತು ನೀಡಲು 800 ಸ್ಮಾರಕಗಳನ್ನು ಗುರುತಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 25000 ಅಲಕ್ಷಿತ ಸ್ಮಾರಕಗಳಿವೆ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪುನರುಜ್ಜೀವನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್‌ ಸುಲ್ತನೇಟ್‌ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್‌ನ ಮೆಗಾಲಿಟಿಕ್‌ ಸೈಟ್‌ ಮತ್ತು ಬೀದರ್‌ನ ಕರೇಜ್‌ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಬೇಕೆಂದು ಕರ್ನಾಟಕದ ಉತ್ಕಟವಾದ ಬಯಕೆಯಾಗಿದೆ. ಇಂಥ ತಾಣಗಳನ್ನು ಯುನೆಸ್ಕೋ ತಾಣಗಳಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಅಗತ್ಯದ ಬೆಂಬಲ ನೀಡಬೇಕೆಂದು ವಿನಂತಿಸಿದರು.

ಕರ್ನಾಟಕದ ಹೊಸ ಪ್ರವಾಸೋದ್ಯಮ ನೀತಿ 2024-29 ಎಲ್ಲ ವರ್ಗದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಪರಿಷ್ಕೃತವಾದ ಮಹತ್ವವನ್ನು ಮತ್ತು ಒತ್ತು ನೀಡಲು ಪ್ರತಿಯೊಬ್ಬ ಪ್ರವಾಸಿಗನ ಸಂತಸಮಯ ಕ್ಷಣಗಳನ್ನು ಕಳೆಯಲು ಹಾಗೂ ಆರ್ಥಿಕ ವೃದ್ಧಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳನ್ನಿರಿಸುತ್ತದೆ ಎಂದು ಮಾನ್ಯ ಸಚಿವರು ಹೇಳಿದರು.

ಈ ಸಮ್ಮೇಳನದಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌, ಪ್ರವಾಸೋದ್ಯಮ ಇಲಾಖೆ ಸಹಾಯಕ ಸಚಿವ ಶ್ರೀ ಸುರೇಶ ಗೋಪಿ ಆಂದ್ರಪ್ರದೇಶ ಮತ್ತು ಪುದುಚೇರಿಗಳ ಪ್ರವಾಸೋದ್ಯಮ ಸಚಿವರು ಹಾಗೂ ದಕ್ಷಿಣದ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

40 mins ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

13 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

14 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

15 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

16 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

19 hours ago