ಬೆಳಗಾವಿ: ಸರ್ಕಾರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ನಮ್ಮ ನಿರೀಕ್ಷೆಗೂ ಮೀರಿ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ಹೆಮ್ಮೆ ತರುವ ಸಂಗತಿಯಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ ಪ್ರಚಾರದ ಅವಶ್ಯಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಬಾಲ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಬಳಿಕ ಅವರು ಮಾತನಾಡಿದರು.
ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಲ್ಲೂ ನಮ್ಮ ಯೋಜನೆಗಳನ್ನು ಕಾಪಿ ಮಾಡಲಾಗುತ್ತಿದೆ. ಇದು ಗೃಹಲಕ್ಷ್ಮೀ ಯೋಜನೆಯ ಜನಪ್ರಿಯತೆಗೆ ಸಾಕ್ಷಿ. ನಾಳೆ ಗೃಹಲಕ್ಷ್ಮೀ ಯೋಜನೆಯನ್ನು ಜನೋಪಯೋಗಿಯಾಗಿ ಮತ್ತು ಸ್ವಾವಲಂಬನೆಗಾಗಿ ಬಳಸಿದ ಮಹಿಳೆಯರನ್ನು ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ. ಅವರಿಗೆಲ್ಲ ಆಡಳಿತ ಸೌಧವನ್ನು, ಆಡಳಿತ ವ್ಯವಸ್ಥೆಯನ್ನು ಹತ್ತಿರದಿಂದ ತೋರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಚಿವರು ಹೇಳಿದರು.
ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ ನನ್ನ ಸಂಕಲ್ಪ
ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ. ಬೆಳಗಾವಿ ಎರಡನೇ ರಾಜಧಾನಿ ಮಟ್ಟಕ್ಕೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ನಡೆಯಬೇಕು, ಮೂಲಭೂತ ಸೌಲಭ್ಯಗಳು ಕೂಡ ನಿರ್ಮಾಣವಾಗಬೇಕು ಎಂದರು.
ನಮ್ಮ ಇಲಾಖೆಯಿಂದ ಜಿಲ್ಲೆಗೆ ಅನೇಕ ಯೊಜನೆಗಳನ್ನು ತರಲಾಗುತ್ತಿದೆ. ಇಷ್ಟೊಂದು ದೊಡ್ಡ ಜಿಲ್ಲೆಗೆ ಈವರೆಗೂ ಒಂದು ಸುಸಜ್ಜಿತ ಭಾಲಭವನ ಇಲ್ಲ, ನಮ್ಮ ಇಲಾಖೆಗೆ ಸುಸಜ್ಜಿತ ಕಟ್ಟಡ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನಗರದ ಮಧ್ಯದಲ್ಲಿಯೇ 4 ಎಕರೆ ಈ ವಿಶಾಲ ಜಾಗವನ್ನು ಗುರುತಿಸಿ ಬಾಲಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈ ಜಾಗದ ಮಾರುಕಟ್ಟೆ ಮೌಲ್ಯ100 ಕೋಟಿಗೂ ಅಧಿಕ. ಇದರ ಜೊತೆಗೆ, ನಮ್ಮ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಸಹ ನಿರ್ಧರಿಸಲಾಗಿದೆ, ಇದಕ್ಕೆ 6 ಕೋಟಿ ರೂ. ಮಂಜೂರಾಗಿದ್ದು, ಇಷ್ಟರಲ್ಲೇ ಹಣ ಬಿಡುಗಡೆಯಾಗಲಿದೆ. ಬಾಲಭವನಕ್ಕೆ ಈಗಾಗಲೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ, ಈಗಾಗಲೇ 2 ಕೋಟಿ ರೂ. ಬಿಡುಗಡೆ ಕೂಡ ಆಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮಕ್ಕಳಿಗಾಗಿ ರೈಲು, ಫ್ಯಾಂಟಸಿ ಪಾರ್ಕ್ ಸೇರಿದಂತೆ, ಆಟದೊಂದಿಗೆ ಕಲಿಯುವುದಕ್ಕೆ ಅವಕಾಶವಾಗುವಂತೆ ಸರ್ವವಿಧದ ಸೌಕರ್ಯಗಳನ್ನು ಬಾಲಭವನ ಒಳಗೊಳ್ಳಲಿದೆ. ಮಕ್ಕಳಿಗೆ ಕಲಿಯುವುದಕ್ಕೆ ಮತ್ತು ನಲಿಯುವುದಕ್ಕೆ ಇದೊಂದು ಅತ್ಯುತ್ತಮ ಸ್ಥಳವಾಗಬೇಕೆನ್ನುವುದೇ ನನ್ನ ಉದ್ದೇಶ ಎಂದರು.
ಕಾನೂನಿಗಿಂತ ದೊಡ್ಡವರು ಯಾರು ಇಲ್ಲ
ಪಂಚಮಸಾಲಿ ಮೀಸಲಾತಿ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡೋಣ. ಪ್ರಚೋದನಾತ್ಮಕ ಹೋರಾಟ ಮಾಡುವುದು ಬೇಡ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಸಚಿವರು ಹೇಳಿದರು.
ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಬಾಲಭವನ ಸೊಸೈಟಿ ಅಧ್ಯಕ್ಷರಾದ ಜಿ.ಆರ್.ನಾಯ್ಡು, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ, ಕಾರ್ಪೊರೇಟರ್ ಸಂದೀಪ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…