ಬೆಂಗಳೂರು: ನಗರ ಠಾಣೆ ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ.
ಪಿಎಸ್ಐ ಪರಶುರಾಮ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದರು. ಪರಶುರಾಮ್ ಸಾವಿನ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದ್ದು, ನಗರ ಪೊಲೀಸ್ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷ ರೂ ಹಣಕ್ಕಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಅವರ ಪುತ್ರ ಪಂಪನಗೌಡ ಬೇಡಿಕೆ ಇಟ್ಟಿದ್ದರು ಎಂದು ಪರಶುರಾಮ್ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದರು.
ಪರಶುರಾಮ್ ಕಳೆದ 7 ತಿಂಗಳಿನಿಂದ ನಗರ ಠಾಣೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿದ್ದರು. ಬಳಿಕ ನಗರ ಠಾಣೆಯಲ್ಲೇ ಮುಂದುವರಿಯಲು 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನನ್ನ ಪತಿ ಪರಶುರಾಮ್ ತೀವ್ರ ಮನನೊಂದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಪಿಎಸ್ಐ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪರಶುರಾಮ್ ಸಾವಿಗೆ ಕಾರಣರಾದವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದವು. ಈಗ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.




