Mysore
19
overcast clouds
Light
Dark

ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ: ತನಿಖೆಗೆ ಆಗ್ರಹಿಸಿದ ಆರ್.ಅಶೋಕ್‌

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಪಿಎಸ್‌ಸಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ಇದೀಗ ಆಕ್ರೋಶ ಭುಗಿಲೆದ್ದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಕೆಪಿಎಸ್‌ಸಿ ಪ್ರಶ್ನೆಪತ್ರಿಕೆಯ ತುಂಬಾ ಕಣ್ಣಿಗೆ ಕುಕ್ಕುವ ಹಾಗೆ ಕಾಣುತ್ತಿರುವ ಲೋಪದೋಷಗಳು ಎಲ್ಲೆಡೆ ಹರಿದಾಡುತ್ತಿವೆ.

ಎಲ್ಲೆಡೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೊರಡಿಸಿರುವ ಪ್ರಕಟಣೆ ಅತ್ಯಂತ ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.

ಪ್ರಶ್ನೆ ಪತ್ರಿಕೆ ತಯಾರಾದ ನಂತರ ನುರಿತ ಸಂಪನ್ಮೂಲ ವ್ಯಕ್ತಿಗಳ ಕೈಯಲ್ಲಿ ಅದನ್ನು ರೀಡ್‌ ಮಾಡಿಸಬೇಕಿತ್ತು. ಲೋಪದೋಷಗಳಿದ್ದರೆ ಅದನ್ನು ತಿದ್ದುಪಡಿ ಮಾಡಿದ ನಂತರ ಪ್ರಶ್ನೆಪತ್ರಿಕೆ ಅಂತಿಮಗೊಳಿಸಬೇಕಿತ್ತು. ಆಗ ಇಡೀ ವ್ಯವಸ್ಥೆ ನಗೆಪಾಟಲಿಗೆ ಈಡಾಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಜವಾಬ್ದಾರರಾದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾರ್ಥಿಗಳಿಗೆ ಸ್ಪಷ್ಟನೆ ನೀಡಬೇಕು. ಮುಂದಿನ ನಡೆಯ ಬಗ್ಗೆ ಮಾಹಿತಿ ನೀಡಲೇಬೇಕು. ಕೆಪಿಎಸ್‌ಸಿ ವ್ಯವಸ್ಥೆಗೆ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.