Mysore
27
overcast clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಒತ್ತಾಯ: ಆರ್‌.ಅಶೋಕ್‌

ಬೆಂಗಳೂರು: ಇಲ್ಲಿನ ಅಭಿವೃದ್ಧಿಯಲ್ಲಿ ಶೂನ್ಯ ರೀತಿಯಲ್ಲಿ ಕಾಣುತ್ತಿದ್ದು, ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಅದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ತಜ್ಞರ ತಂಡ ರಚಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.21) ಬಿಬಿಎಂಪಿ ಚುನಾವಣೆ ಮತ್ತು ಬೆಂಗಳೂರಿನ ಅಭಿವೃದ್ಧಿಯ ಬಗ್ಗೆ ನಡೆದ ಬಿಜೆಪಿ ಶಾಸಕರು ಹಾಗೂ ಮುಖಂಡರ ಸಭೆಯ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಾದ ಮಂಡಿಸಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನ ಅಭಿವೃದ್ಧಿ ಶೂನ್ಯ ಸ್ಥಿತಿಯತ್ತ ಸಾಗಿದೆ. ಅಲ್ಲದೇ ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಸಾರ್ವಜನಿಕರು ಆಸ್ಪತ್ರೆ ಸೇರುತ್ತಿದ್ದಾರೆ ಎಂದರು.

ನಗರದ ಎಲ್ಲಾ ಕಡೆಗಳಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಆದರೆ ಇದೀಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಹಾಗಾಗಿ ಇದರ ವಿರುದ್ಧ ಹೋರಾಟ ನಡೆಸಲು ಸಭೆ ನಡೆಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಅದಕ್ಕೆ ಗ್ರೇಟರ್‌ ಬೆಂಗಳೂರು ರಚಿಸುತ್ತೇವೆ, ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ? ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ಮಾಫಿಯಾಗಳ ಕೈಗೆ ಸಿಲುಕಿದ್ದು, ಡಾನ್‌ಗಳ ಕೈಗೆ ಸಿಕ್ಕಿದೆ. ಇಲ್ಲಿ ಬಾಂಬ್‌ ಬ್ಲಾಸ್ಟ್‌, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆ ನಡೆಯುತ್ತಿದೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಎದುರಾಗಿದೆ. ಆದರೆ ಕಾಂಗ್ರೆಸ್‌ ನಾಯಕರು ಮಾತ್ರ ಗ್ಯಾರಂಟಿಗಳ ಗುಂಗಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ದರೋಡೆ, ಸುಲಿಗೆ ಮತ್ತು ಕೊಲೆಗಳು ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂಬುದೇ ಜನ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಜವಾಬ್ದಾರಿ ವಹಿಸಿಲ್ಲ. ಇನ್ನು ಡಿ.ಕೆ.ಶಿವಕುಮಾರ್‌ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ಹೀಗಾಗಿ ನಮ್ಮ ರಾಜ್ಯದ ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags:
error: Content is protected !!