ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಬನಶಂಕರಿಯ 2ನೇ ಹಂತದ ಶಾಸಕರ ಕಚೇರಿಯಲ್ಲಿ ಹಮಿಕೊಂಡಿದ್ದ 150 ವರ್ಷಗಳ ವಂದೇ ಮಾತರಂ ಸಂಭ್ರಮಾಚರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಕಾದು ನೋಡುತ್ತಿದ್ದೇವೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ಮೂರು ದಿನದೊಳಗೆ ಸರಿ ಹೋಗದಿದ್ದರೆ ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಎಂದು ಹೇಳಿದರು.
ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಹೈಕಮಾಂಡ್ಗೆ ಭಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ. ಹಾಗಂತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಮ್ಮನಿರುವುದಿಲ್ಲ. ಒಂದು ವೇಳೆ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ ಡಿಕೆಶಿ ಸುಮನಿರುವುದಿಲ್ಲ. ಇದು ಕಾಂಗ್ರೆಸ್ಗೆ ಪಾಲಿಗೆ ಉಗುಳಲು ಆಗದ, ನುಂಗಲು ಆಗದ ಬಿಸಿ ತುಪ್ಪವಾಗಿದೆ. ಸಿದ್ದರಾಮಯ್ಯ ವಲಸೆ ಬಂದವರು. ಕೊಟ್ಟಿರುವ ಅಧಿಕಾರ ಸಾಕು. ನನಗೆ ಕೊಡಿ ಎಂದು ಡಿಸಿಎಂ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ವಚನಭ್ರಷ್ಟ ಎಂದು ಡಿ.ಕೆ.ಸುರೇಶ್ ಹೇಳುತ್ತಿದ್ದಾರೆ. ವಚನಭ್ರಷ್ಟ ಎಂಬುದು ಸಿಎಂಗೆ ಕಾಂಗ್ರೆಸ್ ನಾಯಕರು ಕೊಟ್ಟಿರುವ ಟೈಟಲ್ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಸಂಪೂರ್ಣ ಗೊಂದಲಮಯ ವಾತಾವರಣವಿದೆ. ಸರ್ಕಾರ ಸತ್ತು ಹೋಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಧಿಕಾರಿಗಳ ಮಾತು ಕೇಳುತ್ತಿಲ್ಲ. ಗೊಂದಲ ಬಗೆಹರಿಸದಿದ್ದರೆ ಪಕ್ಷ ಕ್ಷೀಣಿಸುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳುತ್ತಿದ್ದಾರೆ. ಸರ್ಕಾರ ಐಸಿಯುನಲ್ಲಿದೆ ಎಂದು ವ್ಯಂಗ್ಯವಾಡಿದರು.





