ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. ರಾಜ್ಯ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಮತ್ತೆ ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್ 11 ರಿಂದ ಒಪಿಡಿ ಬಂದ್ ಮಾಡಲಾಗುತ್ತದೆ. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ ನಡೆಯಲಿದೆ. ಬಿಡದಿ ಟೌನ್ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್, ಕಬ್ಬು ಬಿಲ್ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ ನಡೆಸಲಾಗುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ. 38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ ನಡೆಯಲಿದೆ. ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.





