Mysore
30
broken clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು: ಆರ್‌ ಅಶೋಕ್‌

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು. ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ.

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು.

ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು.

ಕೆಪಿಎಸ್‌ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರವಹಿಸಬೇಕು.

ಕೆಪಿಎಸ್‌ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ” ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://x.com/RAshokaBJP/status/1830521909735248225

Tags:
error: Content is protected !!