ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಮಹಾವಿಕಾಸ್ ಅಘಾಡಿಯೂ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದ 15ನೇ ವಿಧಾನಸಭೆಯ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿ ಸತತ ಎರಡನೇ ಬಾರಿಗೆ ಸ್ಪೀಕರ್ ಹುದ್ದೆಯನ್ನು ಅಲಂಕರಿಸಿದ್ದಾರೆ.
1960ರಲ್ಲಿ ಮಹಾರಾಷ್ಟ್ರ ರಾಜ್ಯ ರಚನೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಹೊರತುಪಡಿಸಿ, ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಅವರು 2ನೇ ಬಾರಿಗೆ ಸಭಾಪತಿಯಾಗಿ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮಾತನಾಡಿ, 1960ರಲ್ಲಿ ರಾಜ್ಯ ಪುನರ್ ವಿಂಗಡಣೆಯಾದ ನಂತರ ಬಾಬಾ ಸಾಹೇಬ್ ಭರಡೆ ಅವರನ್ನು ಬಿಟ್ಟರೆ ಸತತ 2ನೇ ಬಾರಿಗೆ ವಿಧಾನಸಭಾ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ.





