ಬೆಂಗಳೂರು: ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಮಂದಿರ ಉದ್ಘಾಟನಾ ಸ್ಥಳದಲ್ಲಿ ನಿಂತು ಹೇಳಲು ಪ್ರಧಾನಿಗೆ ಮೋದಿ ಅವರಿಗೆ ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಈ ಕುರಿತು ತಮ್ಮ ಅದಿಕೃತ ʼಎಕ್ಸ್ʼ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಪ್ರಧಾನಿ ಅವರೇ ನೀವು ನಿಜವಾದ ರಾಮ ಭಕ್ತರೇ ಆಗಿದ್ದರೇ, ಚುನಾವಣೆ ಪ್ರಚಾರದ ವೇಳೆ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟನ್ನು ಈಡೇರಿಸಿದ್ದಿರಾ ಎಂಬುದನ್ನು ಅಯೋಧ್ಯೆಯ ರಾಮ ಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ರಾಮ ನಿಮಗೆ ಕೇವಲ ಚುನಾವಣಾ ಅಸ್ತ್ರ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ನಲ್ಲಿ ಏನಿದೆ?
ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ.
ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಢಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ.
ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್, ಸರ್ಚಾರ್ಜ್ಗಳನ್ನು ಹೆಚ್ಚಿಸಿದ್ದೀರಿ.
ಪ್ರಧಾನಿ ಮೋದಿ ಅವರೇ, ದೇಶದ ಭದ್ರತೆಯ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಪುಂಖಾನುಪುಂಖ ಆಶ್ವಾಸನೆಗಳನ್ನು ಕೊಟ್ಟಿದ್ದಿರಿ. ಆದರೆ, ಗಡಿಯೊಳಗೆ ಅತಿಕ್ರಮಣ ಮಾಡಿ ಅಕ್ರಮ ಸೇನಾ ನಿರ್ಮಾಣ ಚಟುವಟಿಕೆ ಕೈಗೊಂಡಿರುವ ಚೀನಾವನ್ನು ಹಿಂದಕ್ಕೆ ಕಳುಹಿಸಲಾಗದೆ ಚೀನಾ ನಮ್ಮ ಗಡಿಯನ್ನು ಪ್ರವೇಶಿಸಿಯೇ ಇಲ್ಲ ಎನ್ನುವ ಹೇಳಿಕೆ ನೀಡಿಬಿಟ್ಟಿರಿ! ಆ ಮೂಲಕ ಮುಂದಕ್ಕೆ ಇದ್ದ ಗಡಿ ರೇಖೆಯನ್ನು ಹಿಂದಕ್ಕೆ ಎಳೆದ ಶೂರ ನೀವು! ಯಾವ ಗಡಿ ರೇಖೆಯನ್ನು ಕಾಯುವುದಕ್ಕಾಗಿ ನಮ್ಮ ಪರಾಕ್ರಮಿ ಸೈನಿಕರು ಸಂಘರ್ಷ ನಡೆಸಿ ತಮ್ಮ ಪ್ರಾಣವನ್ನೇ ಸಮರ್ಪಿಸಿದರೋ ಆ ಸೈನಿಕರಿಗೆ ನೀವು ಮರಣೋತ್ತರ ಅವಮಾನ ಮಾಡಿದಿರಿ.
ಹೀಗೆ, ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…