Mysore
20
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಜಲಸಂಪನ್ಮೂಲ ಖಾತೆ ತ್ಯಜಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗರೆಡ್ಡಿ

ಬೆಂಗಳೂರು : ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ರಾಮಲಿಂಗಾರೆಡ್ಡಿ ಅವರು ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂದು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.

ಇನ್ನು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ ತೊರೆಯುವುದಿಲ್ಲ. ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

 

Tags:
error: Content is protected !!