ಬೆಂಗಳೂರು : ಕೆ.ಆರ್ ನಗರ ಮೂಲದ ಮನೆಕೆಲಸದಾಕೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಅತ್ಯಾಚಾರಿ ಪ್ರಜ್ವಲ್ ರೇವಣ್ಣ ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಅನುಭವಿಸಬೇಕಿದೆ.
ಕೇವಲ ನಾಲ್ಕು ತಿಂಗಳ ದಾಖಲೆ ಸಮಯದಲ್ಲೇ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.
ಒಟ್ಟು 11.35 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಐಪಿಸಿ ಸೆಕ್ಷನ್ 376(2)(ಕ) ಅಡಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ 11 ಲಕ್ಷ ರೂ ನೀಡಬೇಕು ಎಂದು ಆದೇಶಿಸಿದ್ದಾರೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆರಂಭವಾಗಲಿದೆ.
ಶುಕ್ರವಾರ ನ್ಯಾಯಾಲಯದಲ್ಲಿ ದೋಷಿ ಎಂದು ತೀರ್ಪು ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟರು.
ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಅಂತ ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ. ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಅಂತ ನ್ಯಾಯಾಧೀಶರ ಎದುರು ಪ್ರಜ್ವಲ್ ಕಣ್ಣೀರಿಟ್ಟು ಬೇಡಿಕೊಂಡಿದ್ದರು.
ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದರು.
ಪ್ರಕರಣದ ಸಂಕ್ಷಿಪ್ತ ಹಿನ್ನೆಲೆ
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್ಎಸ್ಎಲ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.





