ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು, ಈ ತೀರ್ಪಿನಿಂದ ನಮಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಿತು ಎಂದು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನಿಂದ ಕಳವಳವುಂಟಾಗಿತ್ತು. ಮಗನನ್ನು ಹತ್ಯೆಗೈದ ದರ್ಶನ್ ಹಾಗೂ ಗ್ಯಾಂಗ್ಗೆ ಸುಲಭದಲ್ಲಿ ಜಾಮೀನು ಮಂಜೂರಾಗಿದ್ದು ಒಂದು ರೀತಿಯ ಆಘಾತವಾಗಿತ್ತು.
ಆರೋಪಿಗಳಿಗೆ ಶಿಕ್ಷೆಯಾಗಲೇಬೇಕು ಎಂಬುದು ನಮ್ಮ ಪ್ರಾರ್ಥನೆ. ಈಗ ಸುಪ್ರೀಂಕೋರ್ಟ್ ಆರೋಪಿಗಳಿಗೆ ಜಾಮೀನು ರದ್ದು ಮಾಡಿರುವುದು ಸಮಾಧಾನ ತಂದಿದೆ. ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.





