ರಾಜ್ಯ

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಕಟಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಬಿಬಿಯುಎಲ್ ಜೈನ ವಿದ್ಯಾಲಯ 40 ವರ್ಷ ಪೂರೈಸಿದ ಮತ್ತು ಸಿಬಿ ಭಂಡಾರಿ ಜೈನ್ ಕಾಲೇಜಿನ 25 ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದ ಮೂಲ ಸೌಕರ್ಯದ ಸ್ವರೂಪವನ್ನು ಬದಲಿಸಬೇಕಿದೆ. ಇಲ್ಲಿರುವ ಎಲ್ಲರಿಗೂ ಸಂಚರಿಸಲು ಸ್ವಂತ ವಾಹನಗಳು ಬೇಕು. ಯಾರೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಓಡಾಡುವುದಿಲ್ಲ. 1.4 ಕೋಟಿ ಜನ ಸಂಖ್ಯೆ ಇದ್ದರೆ 1.3 ಕೋಟಿ ವಾಹನಗಳಿವೆ. ಹಾಗಾಗಿ ಸಂಚಾರಿ ಒತ್ತಡದ ಸಮಸ್ಯೆ ತೀವ್ರವಾಗಿದೆ. ಬೆಂಗಳೂರು ನಗರದ ಜವಾಬ್ದಾರಿ ತೆಗೆದುಕೊಂಡ ನಂತರ ತಾವು ಸೌಕರ್ಯಕ್ಕೆ ಹೂಡಿಕೆಗೆ ಆದ್ಯತೆ ಕೊಡುತ್ತಿದ್ದೇನೆ. ಸಂಚಾರಿ ಒತ್ತಡ ಇದ್ದರೂ ಸಹ ಯಾರೂ ಬೆಂಗಳೂರು ಬಿಟ್ಟು ಹೋಗಲು ತಯಾರಿಲ್ಲ ಎಂದರು.

ಬೆಂಗಳೂರು ಅತ್ಯಂತ ಪರಮೋಚ್ಚ ನಗರ. ಇಲ್ಲಿ ಉತ್ತಮ ಸಂಸ್ಕೃತಿ ಇದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಪುಲ ಅವಕಾಶಗಳಿವೆ. ಇಲ್ಲಿ ಅತಿ ಹೆಚ್ಚಿನ ಮಾನವ ಸಂಪನ್ಮೂಲವಿದೆ. ಕ್ಯಾಲಿಪೋರ್ನಿಯಾದಲ್ಲಿ 35 ಲಕ್ಷ ಇಂಜಿನಿಯರ್ ಗಳಿದ್ದು, ಬೆಂಗಳೂರು ಒಂದೇ ನಗರದಲ್ಲಿ 25 ಲಕ್ಷ ಇಂಜಿನಿಯರ್ ಗಳಿದ್ದಾರೆ. ಇದು ಬೆಂಗಳೂರಿನ ಶಕ್ತಿಯಾಗಿದೆ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ಆಗಮಿಸಿದ್ದಾಗ ವಿಶ್ವದ ನಾಯಕರು ಮೊದಲು ದೆಹಲಿಗೆ ಬರುತ್ತಿದ್ದರು. ತರುವಾಯ ಮುಂಬೈ, ಚೆನ್ನೈ, ಬಾಂಬೆ, ಹೈದ್ರಾಬಾದ್ ನತ್ತ ತೆರಳುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಇದೀಗ ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬರುತ್ತಿದ್ದಾರೆ. ನಂತರ ದೆಹಲಿಗೆ ತೆರಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಉದ್ಗರಿಸಿದ್ದರು. ಇದಕ್ಕೆ ಕಾರಣ ಗುಣಮಟ್ಟದ ಶಿಕ್ಷಣ ಎಂದು ಡಿ.ಕೆ. ಶಿವಕುಮಾರ್‌ ಪ್ರತಿಪಾದಿಸಿದರು.

ಇದು ಕೇವಲ ಸಿಲಿಕಾನ್‌ ನಗರವಷ್ಟೇ ಅಲ್ಲ, ಆರೋಗ್ಯ ನಗರಿ, ಪ್ರತಿಯೊಂದು ವಲಯದಲ್ಲೂ ಅಭಿವೃದ್ಧಿಯಾಗುತ್ತಿದೆ. ಜೈನ ಶಿಕ್ಷಣ ಸಂಸ್ಥೆಯೂ ಸಹ ಉತ್ತಮ ವಿದ್ಯಾಭ್ಯಾಸವನ್ನು ನೀಡುತ್ತಿದೆ. ಎಲ್ಲಾ ಹಿರಿಯರು, ವಿದ್ಯಾರ್ಥಿಗಳಿಗೆ ಹೇಳುವುದಿಷ್ಟೇ, ನೀವು ಮಾರ್ಗವನ್ನು ಮರೆತರೆ, ನಿಮಗೆ ಫಲ ಸಿಗುವುದಿಲ್ಲ. ನಿಮ್ಮ ಮೂಲ, ನಿಮ್ಮ ಸಂಸ್ಥೆ, ನಿಮ್ಮ ಸಮಾಜ ನಿಮ್ಮ ವಿದ್ಯಾ ಸಂಸ್ಥೆ ಎಲ್ಲಾ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವವರಿಗೆ ಪ್ರೋತ್ಸಾಹ ಕೊಡಿ. ಉತ್ತಮ ಶಿಕ್ಷಣ ನೀಡಿರುವ ಶಿಕ್ಷಕರು, ಆಡಳಿತ ಮಂಡಳಿ ಎಲ್ಲರನ್ನು ಸ್ಮರಿಸಬೇಕಾಗಿದೆ. ಜೈನ ಸಮಾಜ ಮಾಡುವ ಪ್ರತಿಯೊಂದು ಒಳ್ಳೆಯ ಕೆಲಸಗಳಿಗೆ ನಮ್ಮ ಸರ್ಕಾರ ಮತ್ತು ನಾನು ಸದಾ ಬೆಂಬಲಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಮಾತನಾಡಿ, ಜೈನ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಬೇಕಾದಲ್ಲಿ ಸಾಮಾಜಿಕ ಮಾಧ್ಯಮದಿಂದ ದೂರ ಇದ್ದು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಬೇಕು ಎಂದು ಕರೆ ನೀಡಿದರು.

ಜೈನ ಸಮುದಾಯ ಶೈಕ್ಷಣಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಲು ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳನ್ನು ಸಾಮಾಜಿಕ ಮಾಧ್ಯಮದಿಂದ ದೂರ ಇಡಬೇಕು. ಜೈನರು ಎಲ್ಲಾ ವಲಯಗಳಲ್ಲೂ ಮುಂಚೂಣಿಗೆ ಬರಬೇಕು. ನಮ್ಮ ಸಮಾಜ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾದದ್ದಲ್ಲ. ಎಲ್ಲಾ ಪಕ್ಷ, ಪಂಗಡಗಳನ್ನು ಒಳಗೊಂಡು ಮುನ್ನಡೆಯುತ್ತಿದೆ ಎಂದರು.

ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಮಾತನಾಡಿ, ಒಂದು ಕಾಲದಲ್ಲಿ ಲಕ್ಷ್ಮಿ ಪುತ್ರರಿಗೆ ಮನ್ನಣೆ ದೊರೆಯುತ್ತಿತ್ತು. ಹಣವಂತರು, ವ್ಯಾಪಾರಿಗಳಿಗೆ ಮಣೆ ಹಾಕುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದ್ದು, ಉನ್ನತ ಶಿಕ್ಷಣ ಪಡೆದು ಉತ್ತಮ ಉದ್ಯೋಗದಲ್ಲಿರುವವರಿಗೆ ಆದ್ಯತೆ ದೊರೆಯುತ್ತಿದೆ. ಶಿಕ್ಷಣಕ್ಕೆ ಪ್ರಧಾನ್ಯತೆ ದೊರೆಯುತ್ತಿರುವುದನ್ನು ಮನಗಂಡು ಉತ್ತಮ ಶಿಕ್ಷಣ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ಕೇಂದ್ರ ಸರ್ಕಾರದ ರಾಷ್ಟ್ರೀಯ ವ್ಯಾಪಾರಿಗಳ ಕಲ್ಯಾಣ ಮಂಡಳಿಯ ಅಧ್ಯಕ್ಷ ಸುನಿಲ್‌ಜಿ ಸಿಂಗ್ ಮಾತನಾಡಿ, ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಗಮನಾರ್ಹ ಸಾಧನೆ ಇತರರಿಗೆ ಮಾದರಿಯಾಗಿದೆ. ಪ್ರಗತಿಪರ ದೃಷ್ಟಿಕೋನ, ಮೌಲ್ಯಾಧಾರಿತ ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನಿರಂತರ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಸಂಘದ ಅಧ್ಯಕ್ಷ ಚಂಪಾಲಾಲ್‌ ಭಂಡಾರಿ ಮಾತನಾಡಿ, ಜೈನ ಶಿಕ್ಷಣ ಸಂಘದ ಅದ್ಭುತ ಬೆಳವಣಿಗೆಗೆ ಟ್ರಸ್ಟಿಗಳು, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಹಿತೈಷಿಗಳ ಸಾಮೂಹಿಕ ಬೆಂಬಲ ಕಾರಣವಾಗಿದೆ. ಸಂಸ್ಥೆಯು ಶ್ರೇಷ್ಠತೆ ಮತ್ತು ಸಮಗ್ರ ಶಿಕ್ಷಣಕ್ಕೆ ಅಚಲವಾದ ಬದ್ಧತೆ ಹೊಂದಿದೆ ಎಂದರು.

ಸ್ಮರಣ ಸಂಚಿಕೆ ಸಮಿತಿಯ ಅಧ್ಯಕ್ಷರಾದ ಹೇಮರಾಜ್, ಆಚರಣಾ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಜಿ ಪಿರ್ಗಲ್, ಕಾರ್ಯದರ್ಶಿ ಚಂಪಾಲಾಲ್‌, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಸದಸ್ಯರು ಸೇರಿದಂತೆ 2,000 ಕ್ಕೂ ಹೆಚ್ಚು ಜನರು ಈ ಬೃಹತ್ ಸಮಾರಂಭಕ್ಕೆ ಸಾಕ್ಷಿಯಾದರು. ಸುಮಾರು 1,500 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳ ಉಪಸ್ಥಿತಿಯು ಸಂಸ್ಥೆಯ ಮೇಲಿನ ಭಾವನಾತ್ಮಕ ಮೌಲ್ಯವನ್ನು ಹೆಚ್ಚಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago