ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.
ಶುಭಮಂಗಳ ಆರ್.ವಿ.ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಅಗತ್ಯ ಕ್ರಮ ವಹಿಸಲು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಸೂಚನೆಗಳು ಈ ಕೆಳಕಂಡಂತಿದೆ:
* ಧ್ವಜಾರೋಹಣ ಕಂಬಕ್ಕೆ ಧ್ವಜವನ್ನು ಏರಿಸುವ ಅಥವಾ ಇಳಿಸುವ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಬಾರದು.
* ಮಕ್ಕಳ ಕವಾಯತು, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಕಾರ್ಯಕ್ರಮದ ಮೊದಲು ಹಾಗೂ ಆಗಿಂದಾಗ್ಗೆ ಪರಿಶೀಲಿಸಿಕೊಳ್ಳಬೇಕು
* ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು.
* ಕಾರ್ಯಕ್ರಮ ನಡೆಸುವ ಎಲ್ಲಾ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವ ಜೊತೆಗೆ ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬರದಂತೆ ಸೂಚನೆ ನೀಡುವುದು
* ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸಿ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸತಕ್ಕದ್ದು.





