ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಈ ಸಂಬಂಧ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಕೋಳ ಗ್ರಾಮದ ಶಾಂತಲಕ್ಷ್ಮೀ ಕೋಂ ಗುಂಡೂರಾವ್ ಸೇರಿದಂತೆ 30ಕ್ಕೂ ಹೆಚ್ಚು ನೌಕರರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿದಾರರನ್ನು ಮೂರು ತಿಂಗಳ ಒಳಗಾಗಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಅರ್ಜಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು. ಅರ್ಜಿದಾರರು 10 ವರ್ಷಗಳಿಂದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ ಮತ್ತು ಭತ್ಯೆಯನ್ನು ನೀಡಬೇಕಾಗುತ್ತದೆ ಎಂದು ವಿವರ ನೀಡಲಾಗಿದೆ.





