ಬೆಂಗಳೂರು: ಈ ಹಿಂದಿನ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಪಾಪವನ್ನು ತೊಳೆದುಕೊಳ್ಳಲು ಈಗ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೋಮವಾರ (ಆ.೩) ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ಭೋವಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಆಗ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಯಾವುದೇ ತನಿಖೆ ನಡೆಸುವ ಬಗ್ಗೆ ಮಾತನಾಡಲಿಲ್ಲ. ಈಗ ಯಾವ ಮುಖ ಹೊತ್ತು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಅವರು ತಮ್ಮ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಈ ವರೆಗೆ ತನಿಖೆಗೆ ಕೊಟ್ಟಿಲ್ಲ. ಆದರೆ ನಾವು ವಾಲ್ಮೀಕಿ ಹಗರಣವನ್ನು ತನಿಖೆಗೆ ನೀಡಿದ್ದೇವೆ. ಆದರೆ ಈಗ ಬಿಜೆಪಿ ಅವರು ತಾವು ಸಾಚಾಗಳಂತೆ ಬಿಂಬಿಸಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಬಣ್ಣ ಕೆಲವೇ ದಿನಗಳಲ್ಲಿ ಬಯಲಾಗಲಿದೆ ಎಂದು ಟಾಂಗ್ ಕೊಟ್ಟರು.





