ಬೆಂಗಳೂರು: ಒಂದೆಡೆ ಜೂನ್ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗಲಿದೆ. ಆ ಮೂಲಕ ರಾಜ್ಯದಲ್ಲಿ ಬರದ ಭೀತಿ ಕಾಡಲು ಆರಂಭವಾಗಿದೆ.
ರಾಜ್ಯದಲ್ಲಿ ಏಪ್ರಿಲ್ನಿಂದ ಜೂನ್ ಅವಧಿಗೆ ಬಿಸಿಗಾಳಿಯ ದಿನಗಳ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಂದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡುಬರುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಕೊಪ್ಪಳ, ವಿಜಯನಗರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಜೂನ್ ವರೆಗೆ ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ಉಳಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಬಿಸಿಗಾಳಿ ದಿನಗಳು ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಅಲ್ಲಲ್ಲಿ ಹೆಚ್ಚಿನ ತಾಪಮಾನ ಮತ್ತು ಬಿಸಿಗಾಳಿ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೇಸಿಗೆಯಲ್ಲಿ ಕೃಷಿ ಬಿತ್ತನೆಯಲ್ಲಿ ಕುಸಿತ: ಇತ್ತ ಮಳೆಯ ಕೊರತೆ ಮಧ್ಯೆ ಬಿಸಿಗಾಳಿಯ ಮಧ್ಯೆ ರಾಜ್ಯ ಮಾರ್ಚ್ ಅಂತ್ಯದ ವರೆಗೆ ಬೇಸಿಗೆ ಋತುವಿನಲ್ಲಿ ಬಿತ್ತನೆ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ವಾಡಿಕೆ ಬಿತ್ತನೆ ಸಾಧ್ಯವಾಗದೆ ಕುಸಿತ ಕಂಡು ಬಂದಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.
ಇನ್ನು ಈ ಬಾರಿ ಮುಂಗಾರು ಮಳೆ ಕೊರತೆ ಎದುರಾಗುವ ಎಲ್ಲಾ ಸಾಧ್ಯತೆಯಿದ್ದು, ರೈತರು ಭಾರೀ ಆತಂಕದಲ್ಲಿದ್ದಾರೆ.





