Mysore
21
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯರಿಗೆ ಏನೂ ಮಾಡಲೂ ಸಾಧ್ಯವಿಲ್ಲ : ಸಚಿವ ಬೈರತಿ ಸುರೇಶ್

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಸೇರಿದಂತೆ ಕೆಲವು ಸುಳ್ಳು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಮತ್ತು ಇತರರು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಸಿದರು. ಆದರೆ, ಅದು ಸಾಕಾರಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ರಾಜ್ಯವಷ್ಟೇ ಅಲ್ಲ, ಇಡೀ ದೇಶ ಕಂಡ ಅತ್ಯಂತ ಪ್ರಾಮಾಣಿಕ ರಾಜಕೀಯ ನೇತಾರರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 16 ಬಾರಿ ಬಜೆಟ್ ಅನ್ನು ಮಂಡಿಸುವ ಮೂಲಕ ತಳ ವರ್ಗದ ಸಮುದಾಯಗಳೂ ಸೇರಿದಂತೆ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ಕೊಡುಗೆ ನೀಡಿದ್ದಾರೆ. ಅವರ ಈ ಸೇವೆ ಅನನ್ಯವಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಇದರರ್ಥ ¸ನಮ್ಮ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ನೀಡಿ ಜನರಿಗಾಗಿ ಸೇವೆ ಸಲ್ಲಿಸುತ್ತಿರುವ ಸರ್ಕಾರವಾಗಿದೆ ಎಂದು ಸುರೇಶ್ ತಿಳಿಸಿದರು.

ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಹೈಕಮಾಂಡ್ ನೀಡುವ ನಿರ್ದೇಶನಗಳಡಿಯಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ. ಹೀಗಾಗಿ ರಾಜ್ಯದಲ್ಲಿ ಹೈಕಮಾಂಡ್ ಆದೇಶ ಮತ್ತು ದಲಿತರು, ಹಿಂದುಳಿದವರು ಹಾಗೂ ಎಲ್ಲಾ ವರ್ಗದ ಜನರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರವಾಗಿ ಇರುವವರೆಗೂ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದರು.

Tags:
error: Content is protected !!