ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕೂ ಇಳೀತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ, ದೇಶದ ವಿಚಾರ ಬಂದಾಗ, ಕಾಶ್ಮೀರದ ಭಯೋತ್ಪಾದಕರ ದಾಳಿ, ಹತ್ಯೆಗಳ ಆ ಘಟನೆಯನ್ನು ಪ್ರತಿಯೊಬ್ಬ ಸ್ವಾಭಿಮಾನಿ ಕೂಡ ಖಂಡಿಸಿದ್ದಾರೆ. ಭಾರತ ಯಾವತ್ತೂ ಯುದ್ಧ ಸಾರಿದ ಇತಿಹಾಸ ಇಲ್ಲ. ಆದರೆ, ಇವತ್ತು ಭಾರತೀಯರ ರಕ್ಷಣೆ ಮಾಡಬೇಕಾದ ಸಂದರ್ಭದಲ್ಲಿ ಏನು ತೀರ್ಮಾನ ಮಾಡಬೇಕೋ ಅದನ್ನು ಪ್ರಧಾನಿಯವರು ಎಲ್ಲ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ ಎಂದರು.
ಇದರ ನಡುವೆ, ಸನ್ಮಾನ್ಯ ಸಿದ್ದರಾಮಯ್ಯನವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಖಂಡಿತ ಸರಿಯಲ್ಲ. ಯಡಿಯೂರಪ್ಪ ಅವರ ಮಾತಿನಂತೆ ಸಿದ್ದರಾಮಯ್ಯನವರು ಈ ದೇಶದ ಜನರ ಕ್ಷಮೆ ಕೂಡ ಕೇಳಬೇಕು. ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಆಕ್ಷೇಪಿಸಿದರು.





