Mysore
22
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ ನೀಡುತ್ತಿದ್ದಾರೆ: ಡಾ.ಎಚ್.ಸಿ‌ ಮಹದೇವಪ್ಪ

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ‌ ಮಹದೇವಪ್ಪ ಹೇಳಿದ್ದಾರೆ.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ರವಿವಾರ ದಸರಾ ಆಚರಣೆ ಯಶಸ್ವಿ ಹಿನ್ನಲೆಯಲ್ಲಿ ಮಾಧ್ಯಮದವರಿಗೆ ಏರ್ಪಡಿಸಿದ್ದ ಉಪಹಾರ ಕೂಟದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆಪರೇಷನ್ ಬಿಜೆಪಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಪ್ರಕ್ರಿಯೆ ನಡೆದರೂ ಯಾವುದೇ ಪ್ರಯೋಜನವಾಗುವುದಿಲ್ಲ. 135 ಸ್ಥಾನ ಗಳಿಸಿರುವ ನಮ್ಮ ಅಸ್ಥಿತ್ವ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಷ ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಹದೇವಪ್ಪ, ಸಂವಿಧಾನದಲ್ಲಿ ಎಲ್ಲಾ ಆಚರಣೆಗಳಿಗೂ ಅವಕಾಶ ಇದೆ. ಸಂವಿಧಾನವನ್ನು ಅರ್ಥ ಮಾಡಿಕೊಂಡಿದ್ದರೆ ಹೀಗೆಲ್ಲಾ ಮಾತನಾಡುತ್ತಿರಲಿಲ್ಲ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಶಾಲಾ, ಕಾಲೇಜು ಮಕ್ಕಳಿಗೆ ಕಡ್ಡಾಯವಾಗಿ ಬೋಧಿಸುವಂತೆ ಸೂಚನೆ ನೀಡಿರುವುದು ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ.‌ ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ತಮ್ಮ ಅಭಿಪ್ರಾಯ ಹೇಳಲು ಕಾನೂನಿನಲ್ಲೇ ಅವಕಾಶ ಇದೆ. ಹಾಗಾಗಿ ಬೆದರಿಕೆ ಕರೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತು ಪೊಲೀಸರು ಕ್ರಮ‌ಜರುಗಿಸಲಿದ್ದಾರೆ ಎಂದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಪಟ್ಟಂತೆ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಆಮಿಷ ಒಡ್ಡಲಾಗಿತ್ತು ಎಂಬುದು ದೃಢಪಟ್ಟಿಲ್ಲ. ಆದರೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!