ಬೆಂಗಳೂರು: ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಬಿ.ವೈ.ವಿಜಯೇಂದ್ರ ಓದಿ ತಿಳಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಂಡಾರು ಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಪ್ರಶ್ನೆಸಿದ್ದಾರೆ.
ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದಪ್ಪ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆ ಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ, ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲು ಹಾಕಿದ್ದಾರೆ.





