ಬೆಳಗಾವಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಸದ್ಯಕ್ಕೆ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೆ. ಮುಡಾ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತಪ್ಪು ಕಂಡು ಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದರು.
ಮುಡಾ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಎಲ್ಲಾ ಶಾಸಕರದ್ದು, ಹೈಕಮಾಂಡ್ನದ್ದು ಕೂಡ ಇದೇ ಆಗ್ರಹವಾಗಿದೆ ಎಂದು ಮಾಹಿತಿ ನೀಡಿದರು.