Mysore
25
clear sky

Social Media

ಗುರುವಾರ, 29 ಜನವರಿ 2026
Light
Dark

ವರ್ಷ ಪೂರೈಸಿದ ಸಿದ್ದು ಸರ್ಕಾರ: ಸಾಧನೆ ಬಿಚ್ಚಿಟ್ಟ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಇಂದಿಗೆ(ಮೇ.20) ವರ್ಷವಾಯಿತು.  ಅಧಿಕಾರಕ್ಕೆ ಬಂದ  ತಕ್ಷಣ ವಿಳಂಬ ಮಾಡದೇ  ಪಂಚ ಗ್ಯಾರಂಟಿಗಳನ್ನು ಅನುಷ್ಠಾನ  ಮಾಡಿತ್ತು. ಈ ಹಿನ್ನೆಲೆ  ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರೆಸ್‌ಕ್ಲಬ್‌ ನಲ್ಲಿ ಮಾಧ್ಯಮ ಸಂವಾದ ನಡೆಸಿದ್ದಾರೆ.  ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲಾ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳುಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು.

ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ವಿವರಿಸಿದರು.

 

ಮುಖ್ಯಮಂತ್ರಿಗಳ ಮಾತಿನ ಇತರೆ ಹೈಲೈಟ್ಸ್

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ.

ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ.

ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ.

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ.

Tags:
error: Content is protected !!