Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ದಿನಾಂಕ ಬದಲಾವಣೆಗೆ ಸಿಎಂಗೆ ಖರ್ಗೆ ಪತ್ರ

ಬೆಂಗಳೂರು : ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ 3 ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು, ಸಹಕಾರ ಸಂಘಗಳ 47 ನಿರೀಕ್ಷಕರ ಹುದ್ದೆಗಳು ಮತ್ತು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್‌ ಸ್ಟೇಬಲ್‌ ಹುದ್ದೆಗಳಿಗೆ ರಾಜ್ಯ ಲೋಕಸೇವಾ ಆಯೋಗವು 2023ರ ನವೆಂಬರ್‌ 5ರಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿ ಪಡಿಸಿದ್ದು, ಈ ಪರೀಕ್ಷೆಗಳನ್ನು ಬೇರೆ ಬೇರೆ ದಿನಗಳಲ್ಲಿ ನಿಗದಿಗೊಳಿಸಲು ಕ್ರಮ ವಹಿಸುವಂತೆ ಹಲವಾರು ಅಭ್ಯರ್ಥಿಗಳು ತಮ್ಮನ್ನು ಕೋರಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ವಯೋಮಿತಿಗೆ ಸೂಕ್ತವಾದ ಉದ್ಯೋಗ ಸಿಗದೇ ಅನ್ಯಾಯಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಉದ್ಯೋಗಕ್ಕೆ ಸೇರ ಬಯಸಿ ಅರ್ಜಿ ಆಹ್ವಾನಿಸಲಾಗಿರುವ ಪ್ರತಿಯೊಂದು ನೇಮಕಾತಿಗಳಿಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ದೀರ್ಘ ಕಾಲದಿಂದ ತಯಾರಿ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, ಈ ಕಾರಣದಿಂದ ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.

ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!