ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್ 14 ರಂದು ಜಾತಿ ನಿಂದನೆ ಕೇಸ್ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಆದರೆ ಇದೀಗ ಅವರ ವಿರುದ್ಧದ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದು, 53 ಟೆಕ್ನಿಕಲ್ ಮತ್ತು ವೈಜ್ಞಾನಿಕ ಸಾಕ್ಷ್ಯ ಸೇರಿದಂತೆ ಮೂವರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಹೇಳಿಕೆಗಳನ್ನು ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ, ಮುನಿರತ್ನ ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವುದು ಹಾಗೂ ಜಾತಿನಿಂದನೆ ಮಾಡಿರುವುದು ದೃಢಪಟ್ಟಿದೆ. ಅಲ್ಲದೇ ಶಾಸಕ ಮುನಿರತ್ನ ಮತ್ತು ಗುತ್ತಿಗೆದಾರ ಚಲುವರಾಜು ಅವರ ಕರೆ ಸಂಭಾಷಣೆಯಲ್ಲಿಯೂ ಮುನಿರತ್ನ ಅವರದ್ದೇ ಧ್ವನಿ ಎಂದು ಎಫ್ಎಸ್ಎಲ್ ವರದಿಯಿಂದ ದೃಢಪಟ್ಟಿದೆಯೆಂದು ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





