ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಶೇ.98ರಷ್ಟು ಪೂರ್ಣಗೊಂಡಿದ್ದು, ಗ್ರೆಟರ್ ಬೆಂಗಳೂರಿನಲ್ಲಿ ಬಾಕಿ ಇದೆ. ಎಲ್ಲವನ್ನೂ ಕ್ರೂಢೀಕರಿಸಿ ಎರಡು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆನ್ಲೈನ್ನಲ್ಲಿ ಸಮೀಕ್ಷೆಗೆ ಮಾಹಿತಿ ನೀಡುವ ಗಡುವನ್ನು ಈ ತಿಂಗಳ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಸರಾಸರಿ ಶೇ.98ರಷ್ಟು ಸಮೀಕ್ಷೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಶೇ.92ರಷ್ಟು ಸಮೀಕ್ಷೆಯಾಗಿದೆ ಎಂದು ಹೇಳಿದರು.
ಇದನ್ನು ಓದಿ: ಜಿಲ್ಲೆಯಲ್ಲಿ ಶೇ.೮೫ರಷ್ಟು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪೂರ್ಣ
ಆನ್ಲೈನ್ ಸಮೀಕ್ಷೆಯಲ್ಲಿ ಭಾಗವಹಿಸಲು ಇದೇ ತಿಂಗಳ 30ರವರೆಗೂ ಗಡುವು ನೀಡಲಾಗಿದೆ. ಬೆಂಗಳೂರಿನಲ್ಲಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಉಳಿದ ಎಲ್ಲಾ ಜಿಲ್ಲೆಗಳ ಅಂಕಿ-ಸಂಖ್ಯೆಗಳನ್ನೂ ಕ್ರೋಢಿಕರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.
ಬೆಂಗಳೂರು ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ ಮುಂದಿನ ರೂಪುರೇಷೆ ಸಿದ್ದಪಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ, ಒಂದೂವರೆ ಅಥವಾ ಎರಡು ತಿಂಗಳ ಒಳಗಾಗಿ ವರದಿ ಪಡೆದುಕೊಳ್ಳಲಾಗುವುದು ಎಂದರು.
ಸಮೀಕ್ಷೆಯಲ್ಲಿ ಭಾಗವಹಿಸಬೇಡಿ ಎಂದು ಕರೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜೆಸ್ವಿ ಸೂರ್ಯ ಅವರಿಗೆ ಮುಖಭಂಗವಾಗಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಾತುಗಳನ್ನು ಜನ ಕೇಳಿಲ್ಲ. ಎಲ್ಲರೂ ಬುದ್ದಿವಂತರಾಗಿ ಸಮೀಕ್ಷೆಯಲ್ಲಿ ಭಾಗವಹಿಸುವ ಮೂಲಕ ಮಾಹಿತಿಗಳನ್ನು ನೀಡಿದ್ದಾರೆ ಎಂದರು.





