Mysore
25
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಒಳಹರಿವು ಕ್ಷೀಣಿಸತೊಡಗಿದೆ.

ರಾಜ್ಯದ ಒಳನಾಡಿನಲ್ಲಿ ಮಳೆ ಕೊರತೆ ಉಂಟಾಗಿ ಮುಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ಭಾರೀ ಹಿನ್ನಡೆ ಉಂಟಾಗಿದೆ. ಉತ್ತರ ಒಳನಾಡಿನ ಬಹಳಷ್ಟು ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಿದೆ. ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದ್ದು, ಬರದ ಛಾಯೆ ಜುಲೈನಲ್ಲೇ ಕಂಡು ಬರುತ್ತಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜುಲೈ ಒಂದರಿಂದ ಜು.10ರವರೆಗೆ ರಾಜ್ಯದಲ್ಲಿ ವಾಡಿಕೆ ಮಳೆಯಾಗಿದೆ. ಅಂದರೆ, ವಾಡಿಕೆಯ 84 ಮಿ.ಮೀ. ಮಳೆಗೆ 85 ಮಿ.ಮೀ.ನಷ್ಟು ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಆದರೆ, ದಕ್ಷಿಣ ಒಳನಾಡಿನಲ್ಲಿ ಶೇ.58ರಷ್ಟು ಹಾಗೂ ಉತ್ತರ ಒಳನಾಡಿನಲ್ಲಿ ಶೇ.6ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ 21 ಮಿ.ಮೀ.ಗೆ ಕೇವಲ 9 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ತೀವ್ರ ಮಳೆ ಕೊರತೆ ಎದುರಿಸುವಂತಾಗಿದೆ.

Tags:
error: Content is protected !!