ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.
ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರ ಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು.
ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ರಾಜ್ಯ ಸರಕಾರಕ್ಕೆ ತಾಕೀತು ಮಾಡಿದರು.





