ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆಯ ನಂತರ ಈಗ ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದ್ದು, ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ ಎಂದು ಸಚಿವ ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ಹಾಲಿನ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ವೆಂಕಟೇಶ್ ಅವರು, ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ತೀವ್ರ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ 10 ರೂ ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದಾರೆ. ಅನ್ನದಾತರ ಬೇಡಿಕೆಯ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದ್ದು, ಎಲ್ಲಾ ರೈತರು ಕೂಡ ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಆದರೆ ಎಷ್ಟು ದರ ಹೆಚ್ಚಳ ಮಾಡುತ್ತೇವೆ ಎಂಬುದರ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ ಎಂದರು.
ಇನ್ನು ಹಾಲಿನ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡರೆ ಶೀಘ್ರದಲ್ಲೇ ಹಾಲಿನ ದರ ದುಬಾರಿಯಾಗುದ ಸಾಧ್ಯತೆಯಿದೆ ಎನ್ನಲಾಗಿದೆ.
ಒಟ್ಟಾರೆಯಾಗಿ ಬಸ್ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಕೊಂಡುಕೊಳ್ಳುವವರು ಜೇಬು ಮುಟ್ಟಿ ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಈ ಹಿನ್ನೆಲೆಯಲ್ಲಿ ಜನತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ವಿಪಕ್ಷಗಳು ಕೂಡ ಸರ್ಕಾರದ ವಿರುದ್ಧ ಕೆಂಡಕಾರಿದ್ದು, ಗ್ಯಾರಂಟಿ ಯೋಜನೆ ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿವೆ.





