ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳು ಮಾಹಿತಿ ನೀಡಿದ್ದಾರೆ.
ಯಾರ ನಿವಾಸದ ಮೇಲೆ ದಾಳಿ?
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ಗದಗ-ಬೆಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಕಚೇರಿ ಹಾಗೂ ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಅವರ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಇನ್ನೂ ಕೆಲ ಅಧಿಕಾರಿಗಳ ನಿವಾಸ, ಕಚೇರಿ ಮತ್ತು ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲೆ ಪತ್ರಗಳ ಸಹಿತ ವ್ಯಾಪಕ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.





