ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ದೃಢ ನಿರ್ಧಾರ ಮಾಡಿದ್ದು, ಭಾರೀ ಪ್ರತಿಭಟನೆಗೆ ಮುಂದಾಗಿದೆ.
38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಫೆಬ್ರವರಿ 20ರಿಂದ ಕೆಎಸ್ಆರ್ಟಿಸಿಯ 4 ನಿಗಮದ ನೌಕರರು ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ.
ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬರುವ ಸಾವಿರಾರು ಸಾರಿಗೆ ನೌಕರರು ಫ್ರೀಡಂಪಾರ್ಕ್ನಲ್ಲಿ ಜಮಾಯಿಸಲಿದ್ದಾರೆ.
ಬಸ್ ಸಂಚಾರ ಸ್ಥಗಿತಗೊಳ್ಳುವ ಬಗ್ಗೆ ಯಾವುದೇ ಆದೇಶ ಹೊರ ಬಂದಿಲ್ಲ. ಹೀಗಾಗಿ ಬಸ್ಗಳ ಓಡಾಟ ಎಂದಿನಂತೆ ಇರಲಿದೆ. ಆದರೆ, ನೌಕರರು ಕೆಲಸ ಹಾಜರಾಗದಿದ್ದರೆ, ಬಸ್ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.





