ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ತಕ್ಷಣವೇ ಕ್ರಮ ಕೈಗೊಳ್ಳಲಿ ಎಂದರು.
ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಎರಡೂ ಕಡೆ ಈ ಬಗ್ಗೆ ಚರ್ಚೆಯಾಗಿದೆ. ಸರ್ಕಾರ ಉತ್ತರವನ್ನೂ ನೀಡಿದೆ. ನಾನೂ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಿಲಿಂಡರ್ ಅಭಾವವನ್ನು ಬಗೆಹರಿಸುವಂತೆ ಮನವಿ ಮಾಡಿದ್ದೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ದೇಶದ ಯಾವುದೇ ರಾಜ್ಯದಲ್ಲೂ ಸಿಲಿಂಡರ್ ಪೂರೈಕೆ ಸಮಸ್ಯೆಯಿಲ್ಲ, ಕರ್ನಾಟಕದಲ್ಲಿ ಮಾತ್ರ ಏಕೆ? ಎಂದು ಪ್ರಶ್ನಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರಬಹುದು ಎಂದರು.
ಕೇಂದ್ರ ಸರ್ಕಾರ ಸಮರ್ಪಕವಾಗಿ ಸಿಲಿಂಡರ್ ಪೂರೈಸಿದರೆ, ನಾವು ಜನರಿಗೆ ತಲುಪಿಸುತ್ತೇವೆ. ಸಿಲಿಂಡರ್ಗಳನ್ನು ಇಟ್ಟುಕೊಂಡು ನಾವು ಏನು ಮಾಡಲು ಸಾಧ್ಯ? ಎಂದು ಮರು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಬೇರೆ ದೇಶಗಳಿಂದ ಸಿಲಿಂಡರ್ಗಳನ್ನು ಆಮದು ಮಾಡಿಕೊಂಡು ದೇಶದಲ್ಲಿ ಸೃಷ್ಟಿಯಾಗಿರುವ ಅಭಾವವನ್ನು ಸರಿದೂಗಿಸಬೇಕು. ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರೀ ಸಮಸ್ಯೆಯಾಗಲಿದೆ. ಈ ಉದ್ಯಮವನ್ನು ನಂಬಿಕೊಂಡು ಬಹಳಷ್ಟು ಮಂದಿ ಇದ್ದಾರೆ. ಅವರೆಲ್ಲ ತೊಂದರೆಗೆ ಸಿಲುಕಲಿದ್ದಾರೆ ಎಂದು ಎಚ್ಚರಿಸಿದರು.




