ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿಗೆ ಬಿಜೆಪಿ ಸೇರಿದಂತೆ ಯಾರೂ ಬೇಕಾದರೂ ಹೋಗಲಿ. ಯಾರು ಬೇಡ ಎಂದು ಹೇಳುತ್ತಾರೆ. ಈ ಸಂದರ್ಭದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ. ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.
ಇನ್ನು ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ, ಮುಸ್ಲಿಮರಿರಲಿ ಯಾರೇ ಆದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.





