ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿ ಮನವಿ ಮಾಡಿದ್ದು ಅವರು ಬಿಜೆಪಿ ಅಭ್ಯರ್ಥಿ ಆಗಬಯಸಿದ್ದಾರೆ ಅನ್ನೋದು ಸ್ಪಷ್ಟವಾಗುತ್ತದೆ, ಇನ್ನು ಅವರು ಕಾಂಗ್ರೆಸ್ ಪಕ್ಷ ಸೇರುವ ಮಾತು ಹೇಗೆ ಉದ್ಭವಿಸೀತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ನಗರದಲ್ಲಿಂದು ಮಾಧ್ಯಮಗಳು ಸುಮಲತಾ ಕಾಂಗ್ರೆಸ್ ಪಕ್ಷ ಸೇರುವುದು ಖಚಿತವಾ ಅಂತ ಪ್ರಶ್ನಿಸಿದಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಅಂತ ಅವರನ್ನು ಯಾರೂ ಕರೆದಿಲ್ಲ, ಯಾರಾದರೂ ಆಹ್ವಾನಿಸಿದ್ದರೆ ಅವರು ಹೇಳಲಿ, ಅದಾದ ಬಳಿಕ ತಾನು ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಸದಕ್ಕಂತೂ ಅವರು ಬಿಜೆಪಿಯಿಂದ ಸ್ಪರ್ಧಿಸುವುದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ಉತ್ತರಿಸಿದರು.
ಸುಮಲತಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಅವರು ಹೇಳಿದ್ದು ಗಣನೆಗೆ ಬರಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು.
ಸುಮಲತಾ ಅವರ ಪಾಲಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದಂತೆಯೇ ಅಂತ ಕೇಳಿದ ಪ್ರಶ್ನೆಗೆ ಸಚಿವ, ಅದನ್ನು ಅವರನ್ನಷ್ಟೇ ಕೇಳಬೇಕು ಉತ್ತರಿಸಿದರು.





