ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್ ಪಾರ್ಟಿ ಹಾಗೂ ಆಪರೇಷನ್ ಹಸ್ತ ಸೇರಿದಂತೆ ಇನ್ನಿತರ ವಿಚಾರಗಳು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ಈ ಬೆನ್ನಲ್ಲೇ ಇಂದು(ಜನವರಿ.13) ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಮೂರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ ಸುರ್ಜೇವಾಲ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಜೈ ಬಾಪು, ಜೈ ಸಂವಿಧಾನ ಅಧಿವೇಶನಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ. ಅಲ್ಲದೇ ಈ ವೇಳೆಯೇ ಕಾಂಗ್ರೆಸ್ ಆಂತರಿಕ ಕಲಹ ಸರಿಪಡಿಸುವ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಿದೆ.
ಇನ್ನೂ ಇಂದು ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು, ಬಳಿಕ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ.





