ಬೆಂಗಳೂರು: ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ ಅವರು, ಪ್ರಸ್ತುತ ಇಲಾಖೆಗೆ 1864 ಕೋಟಿ ರೂ ಅನುದಾನ ನೀಡಿದ್ದು, ಇದುವರೆಗೆ 1235 ಕೋಟಿ ರೂ ವೆಚ್ಚವಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕಾಗಿ 100 ಕೋಟಿ ರೂ ಒದಗಿಸಲಾಗಿದ್ದು ಆದಷ್ಟು ಬೇಗನೆ ಅದನ್ನು ಪೂರ್ಣಗೊಳಿಸಬೇಕು. ಜೊತೆಗೆ ಐಟಿಐ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೌಶಲ್ಯವಿದ್ದರೆ ಮಾತ್ರ ಉದ್ಯೋಗ ಸಿಗಲು ಸಾದ್ಯ. ಕೌಶಲ್ಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಜಾರಿ ಮಾಡಬೇಕು. ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರಲ್ಲಿ 1,61,883 ಅರ್ಹ ಫಲಾನುಭವಿಗಳಿಗೆ 216 ಕೋಟಿ ರೂ ನಿರುದ್ಯೋಗ ಭತ್ಯೆ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ವರ್ಷದ ಬಜೆಟ್ನಲ್ಲಿ ಘೋಷಿಸಲಾಗಿದ್ದ ಸುಮಾರು 20,000 ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಹಾಗೂ ಕಮ್ಯೂನಿಕೇಶನ್ ತರಬೇತಿ ನೀಡುವ ಕಾರ್ಯಕ್ರಮವನ್ನು ಬೇಗ ಅನುಷ್ಠಾನಗೊಳಿಸಬೇಕು. ರಾಜ್ಯದಲ್ಲಿ ಅಕ್ಕ ಕಾಫಿ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟಿನ್ಗಳನ್ನು ಮಹಿಳಾ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.




