ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.
ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಜಾರೋಷವಾಗಿ ಸಿಎಂ, ಡಿಸಿಎಂ ರನನ್ನು ಭೇಟಿ ಮಾಡಿದರೆ ಅದನ್ನೇ ದೊಡ್ಡದು ಮಾಡುತ್ತಾರೆ ಎಂದು ದೂರಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಪುಕ್ಸಟ್ಟೆ ಬಿದ್ದಿಲ್ಲ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜನತೆ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಹೇಳಿ ತಿರಸ್ಕಾರ ಮಾಡಿದವರನ್ನು ಇಲ್ಲಿ ಅಭ್ಯರ್ಥಿಯಾಗಿ ಮಾಡುತ್ತಾರೆ ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿದರು.
ರಾಜ್ಯಸಭೆಯಲ್ಲಿ ಅಡ್ಡ ಮತದಾನದ ವಿಚಾರವನ್ನು ದೊಡ್ಡದು ಮಾಡಿ ಬೀದಿಯಲ್ಲಿ ಪ್ರತಿಭಟನೆ ನಡೆಸಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದವರೊಂದಿಗೆ ನಾನು ಹೇಗೆ ಹೋಗಲಿ ಎಂದರು. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ನಾನು ಮಾಡಿದ ಬಹುದೊಡ್ಡ ತಪ್ಪು ಎಂದು ಇಂದು ಅನಿಸುತ್ತಿದೆ ಎಂದು ಹೇಳಿದರು.
ಕ್ಷೇತ್ರದ ಜನತೆಗಾಗಿ ಹಾಗೂ ಅಭಿವೃದ್ಧಿಗಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದರು, ಯಶವಂತಪುರ ಕ್ಷೇತ್ರದಲ್ಲಿ ಆರು ಬಾರಿ ಚುನಾವಣೆಗೆ ನಿಂತಿದ್ದೇನೆ ನಾಲ್ಕು ಬಾರಿ ಗೆದ್ದಿದ್ದೇನೆ ಎರಡು ಬಾರಿ ಸೋತಿದ್ದೇನೆ, ಮಸಲತ್ತು ಮಾಡಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದವರೊಂದಿಗೆ ಹೆಜ್ಜೆ ಹಾಕಿ ಗಂಡಸತನದ ಬಗ್ಗೆ ಮಾತನಾಡುತ್ತಿರುವ ಜೆಡಿಎಸ್ ಜವರಾಯಿ ಗೌಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.





