ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು ಒದಗಿಸಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಕಣದಲ್ಲಿ ಕೇಂದ್ರ ಸಚಿವರು ಮೈಮೇಲೆ ದೇವರು ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅವರ ಪಾತ್ರ ಏನು? ಎಂದು ಮೊದಲು ತಿಳಿಸಿ ಎಂದು ಸವಾಲು ಹಾಕಿದರು.
ಬರ ಪರಿಹಾರ ನೆರವು ಪಡೆಯಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗಿತ್ತು. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು ಏಕೆ ನೆರವು ನೀಡಲಿಲ್ಲ ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷವನ್ನು ಕಿತ್ತು ಎಸೆಯಿರಿ ಎಂದು ಹೇಳುತ್ತಿದ್ದಾರೆ. ಅವರ ಭಾಷೆ ಅವರ ಘನತೆಗೆ ತಕ್ಕುದಾಗಿಲ್ಲ. ತಮಿಳುನಾಡು, ಆಂಧ್ರಪ್ರದೇಶ ಅಲ್ಲೆಲ್ಲಾ ಸ್ಥಳೀಯ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ತಮಿಳುನಾಡಿನಲ್ಲಿ ಸ್ಟ್ಯಾಲಿನ್, ಆಂದ್ರಪ್ರದೇಶದಲ್ಲಿ ಜಗನ್ಮೋಹನ್ ರೆಡ್ಡಿ ಅವರು ಯಶಸ್ವಿಯಾಗಿ ನಾಯಕತ್ವ ಬಳಸಿಕೊಂಡರು. ಕುಮಾರಸ್ವಾಮಿ ಅವರು ತಮ ವರ್ತನೆ ಹಾಗೂ ಭಾಷೆಯ ಬಳಕೆಯಿಂದಾಗಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.
ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಅನಗತ್ಯ ಅಪಪ್ರಚಾರ ಮಾಡುತ್ತಿವೆ. ಸಿದ್ದರಾಮಯ್ಯ ಅವರು 1.30 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದಾರೆ. ಪ್ರತಿಯೊಂದು ಶಾಸಕರ ಕ್ಷೆ?ತ್ರಕ್ಕೂ 10, 20, 50 ಲಕ್ಷ ರೂ.ಗಳಂತೆ ಮೂರು ಹಂತದಲ್ಲಿ ಒಟ್ಟು 80 ಲಕ್ಷ ರೂ. ಒದಗಿಸಲಾಗಿದೆ. ಪ್ರಸಕ್ತ ಬಜೆಟ್ನಲ್ಲಿ 25 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಒಟ್ಟು 105 ಕೋಟಿ ರೂ.ಗಳನ್ನು ಒದಗಿಸಲಾಗಿದೆ, ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಗಳ ಕ್ರಿಯಾ ಯೋಜನೆಯ ಮೂಲಕವೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತವಾದ ಪಾಲು ದೊರೆಯುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ ಅವರುಗಳು ಒಮ್ಮೆಯೂ ಬಾಯಿ ಬಿಟ್ಟಿಲ್ಲ ಎಂದು ಕಿಡಿಕಾರಿದರು.





