ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಂಚಖಾತ್ರಿ ಯೋಜನೆಗಳ ಗುಣಗಾನ ಮಾಡಿದ್ದಲ್ಲದೆ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ನಂಜುಂಡಪ್ಪ ವರದಿಯ ಬಳಿಕ ಮತ್ತೊಂದು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಡಾ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ವರದಿ ಬಳಿಕ ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಿನಿಂದ ಹೊರಭಾಗದಲ್ಲಿ ಔದ್ಯೋಗಿಕ ವಲಯಕ್ಕೆ ಆದ್ಯತೆ ನೀಡುವ ಮೂಲಕ ನಿರುದ್ಯೋಗ ನಿವಾರಣೆಗೆ ಒತ್ತು ನೀಡಲಾಗುತ್ತದೆ. ಹಿಂದಿನ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರವನ್ನು ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು. ರಾಜ್ಯದ ಆರ್ಥಿಕ ಸ್ಥಿತಿಯನ್ನು ಒಂದು ಟ್ರಿಲಿಯನ್ಗೆ ಹೆಚ್ಚಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು, ರಾಜಸ್ವ ಸಂಗ್ರಹ ಏರಿಕೆ ಕಂಡಿದೆ. ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದ್ದು, ದುರ್ಬಲ ವರ್ಗಗಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಪ್ಪಿಸಲು ಪ್ರತ್ಯೇಕ ಕಾಯಿದೆ ರೂಪಿಸುವುದಾಗಿ ತಿಳಿಸಿದರು.
ಮಳೆ ನೀರು ಸಂಗ್ರಹ ಹಾಗೂ ಅಂತರ್ಜಲ ಸುಧಾರಣೆಗೆ ಮಳೆ ನೀರು ಕೊಯ್ಲು ಹಾಗೂ ಇತರ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ರಾಜ್ಯದಲ್ಲಿ ಜ್ಞಾನ, ವಿಜ್ಞಾನ, ಆರೋಗ್ಯ, ಶಿಕ್ಷಣ ವಿಕಸನಕ್ಕಾಗಿ ಕ್ವೀನ್ ಸಿಟಿ ನಿರ್ವಹಣೆ ಮಾಡುತ್ತಿರುವುದನ್ನು ರಾಜ್ಯಪಾಲರು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು.
ಕಲಬುರಗಿಯಲ್ಲಿ 1000 ಎಕರೆ ಪ್ರದೇಶದಲ್ಲಿ ಟೆಕ್?ಸಟೈಲ್ ಪಾರ್ಕ್ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.