ರಾಜ್ಯ

ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

ಬೆಂಗಳೂರು : ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ (ಅ.13) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ಇದನ್ನೂ ಓದಿ:-ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ ; ಅ.27ರಂದು ಸುವರ್ಣ ಮಹೋತ್ಸವ

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ಕುಡುಕನ ಪಾತ್ರಗಳಿಗೆ ಜನಪ್ರಿಯತೆ
ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.

ಹಾಸ್ಯ ನಟನಾಗಿ ಯಶಸ್ಸು
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದು, ಉತ್ತರ ಕರ್ನಾಟಕದ ಕಲಾರಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಅವರ ಅಂತಿಮ ವಿಧಿವಿಧಾನಗಳು ತಾಳಿಕೋಟಿ ನಗರದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

11 hours ago