Mysore
25
overcast clouds

Social Media

ಭಾನುವಾರ, 16 ಮಾರ್ಚ್ 2025
Light
Dark

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ.

ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

 

Tags: