ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗಲೇಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ನಮ್ಮ ಕಡೆಯಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈ ಬಗ್ಗೆ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಕೂಲಂಕುಷವಾಗಿ ಚರ್ಚಿಸಿ ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಇನ್ನು ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಶಾಸಕ ಯತ್ನಾಳ್ ಅವರು, ಪಕ್ಷದ ಹೈಕಮಾಂಡ್ ವಿಜಯೇಂದ್ರರನ್ನು ಏಕೆ ಅಧ್ಯಕ್ಷರನ್ನಾಗಿ ಮಾಡಿದೆಯೋ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಲೇಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ಅವರೇ ಬಿಎಸ್ವೈ ನಕಲಿ ಸಹಿ ಮಾಡಿದ್ದಾರೆ. ಇದರ ಬಗ್ಗೆ ಸಂಪೂರ್ಣವಾಗಿ ತನಿಖೆಯಾಗಲಿ ಎಂದು ಒತ್ತಾಯಿಸಿದರು.
ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ ಎಂದು ಆಕ್ರೋಶ ವ್ಯಕ್ತಪಡಿಸಿದರು.