ರಾಜ್ಯದಲ್ಲಿ ಜೂನ್ 24ರಂದು 8 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಈ ಬಾರಿಯೂ ವರುಣದೇವ ಯಾಕೋ ಕೃಪೆ ತೋರುತ್ತಿಲ್ಲ ಎಂದು ರೈತರು ಮನನೊಂದಿದ್ದರು. ಈ ಬೆನ್ನಲ್ಲೇ ರಾಜ್ಯ ಹವಾಮಾನ ಇಲಾಖೆ ರೈತರಿಗೆ ಭಾರೀ ಸಿಹಿ ಸುದ್ದಿಯೊಂದನ್ನು ನೀಡಿದೆ. ಜೂನ್ 22ರಂದು ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಜೂನ್ 24ರವರೆಗೆ ಉತ್ತರ, ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 22ರಂದು ಕರಾವಳಿಯ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 23ರಂದು ಕರಾವಳಿಯ 3 ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ತುಮಕೂರು, ಮೈಸೂರು, ದಾವಣಗೆರೆ, ಧಾರವಾಡ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ೨೦ ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





